ಸಂದೇಶ್ ನಾಗರಾಜ್ ಅರ್ಪಿಸಿ, ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಎನ್.ಸಂದೇಶ್ ಅವರು ನಿರ್ಮಿಸುತ್ತಿರುವ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಒಡೆಯ‘ ಚಿತ್ರದ ಎರಡು ಹಾಡುಗಳ ಚಿತ್ರೀಕರಣ ಹತ್ತು ದಿನಗಳ ಕಾಲ ಸ್ವಿಜರ್ ಲ್ಯಾಂಡ್ನಲ್ಲಿ ನಡೆದಿದೆ. ದರ್ಶನ್ ಹಾಗೂ ರಾಘವಿ ತಿಮ್ಮಯ್ಯ ಅಭಿನಯಿಸಿದ ಈ ಹಾಡುಗಳನ್ನು ಜಿಮಿಜಿಪ್ ಹಾಗೂ ಎರಡು ಕ್ಯಾಮೆರಾಗಳನ್ನು ಬಳಸಿ ಅದ್ದೂರಿಯಾಗಿ ಚಿತ್ರಿಸಿಕೊಳ್ಳಲಾಗಿದೆ. ಕಲೈ ಅವರು ಈ ಹಾಡುಗಳಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. ಸುಮಾರು ಐವತ್ತು ಜನರ ತಂಡ ಸ್ವಿಜರ್ಲ್ಯಾಂಡ್ಗೆ ಪಯಣ ಬೆಳೆಸಿತ್ತು. ಈ ಹಾಡುಗಳ ಚಿತ್ರೀಕರಣದೊಂದಿಗೆ ‘ಒಡೆಯ‘ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಡಿಸೆಂಬರ್ನಲ್ಲಿ ಚಿತ್ರ ತೆರೆಗೆ ಬರಲಿದೆ.

ಎಂ.ಡಿ.ಶ್ರೀಧರ್ ನಿರ್ದೇಶನದ ಈ ಚಿತ್ರಕ್ಕೆ ಅರ್ಜುನ್ ಜನ್ಯ ಅವರ ಸಂಗೀತ ನಿರ್ದೇಶನವಿದೆ. ಜಯಂತ ಕಾಯ್ಕಿಣಿ, ಡಾ. ವಿ.ನಾಗೇಂದ್ರಪ್ರಸಾದ್, ಕವಿರಾಜ್ ಹಾಗೂ ಬಹದ್ದೂರ್ ಚೇತನ್ ಕುಮಾರ್ ಈ ಚಿತ್ರದ ಹಾಡುಗಳನ್ನು ಬರೆದಿದ್ದಾರೆ. ಕೆ.ಕೃಷ್ಣಕುಮಾರ್ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಕಲೈ ನೃತ್ಯ ನಿರ್ದೇಶನ ಹಾಗೂ ವಿಜಯ್ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ಪ್ರಶಾಂತ್ ರಾಚಪ್ಪ ಸಂಭಾಷಣೆ ಬರೆದಿದ್ದಾರೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ನಾಯಕಿಯಾಗಿ ರಾಘವಿ ತಿಮ್ಮಯ್ಯ ಅಭಿನಯಿಸಿದ್ದಾರೆ. ಯಶಸ್ ಸೂರ್ಯ, ಪಂಕಜ್, ನಿರಂಜನ್, ಸಮರ್ಥ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.











































